ಭದ್ರಾವತಿ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನೈರುತ್ಯ ಪದವಿಧರ ಹಾಗು ಶಿಕ್ಷಕರ ಕ್ಷೇತ್ರ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಮತದಾರರೊಂದಿಗೆ ಸಂವಾದ ಕಾರ್ಯಕ್ರಮ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಉದ್ಘಾಟಿಸಿದರು.
ಭದ್ರಾವತಿ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಳೆದ 1 ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಅದರಲ್ಲೂ ಶಿಕ್ಷಣ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದರು.
ಅವರು ಗುರುವಾರ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಮತದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ನೈರುತ್ಯ ಪದವಿಧರ ಹಾಗು ಶಿಕ್ಷಕರ ಕ್ಷೇತ್ರ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ನಡೆಸಿ ಮಾತನಾಡಿದರು.
ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳನ್ನು ತರುವ ಉದ್ದೇಶದಿಂದ ಹೊಸ ಶಿಕ್ಷಣ ನೀತಿ ಅಸ್ತಿತ್ವಕ್ಕೆ ತಂದಿದೆ. ಆದರೆ ಕಾಂಗ್ರೆಸ್ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸದೆ ನಿರ್ಲಕ್ಷತನ ವಹಿಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವ ಜೊತೆಗೆ ಶಿಕ್ಷಕರ ವೇತನ ಹೆಚ್ಚಳ ಸೇರಿದಂತೆ ಬಹುತೇಕ ಸಮಸ್ಯೆಗಳಿಗೆ ಸ್ಪಂದಿಸಿದೆ ಎಂದರು.
ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸುವ ಮೂಲಕ ಎಲ್ಲಾ ರೀತಿಯ ಸಹಕಾರ ನೀಡಿದೆ. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಶ್ರಮ ಸಹ ಹೆಚ್ಚಿನದ್ದಾಗಿದೆ. ಲೋಕಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಲಭಿಸಲಿದ್ದು, ಈ ಚುನಾವಣೆಯಲ್ಲೂ ಪಕ್ಷದ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಮತದಾರರು ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತö್ಯದ ಮತಗಳನ್ನು ನೀಡುವ ಮೂಲಕ ಗೆಲುವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಪದವಿಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಪವಾರ್, ನಗರ ಅಧ್ಯಕ್ಷ ಆರ್. ಕರುಣಾಮೂರ್ತಿ, ಗ್ರಾಮಾಂತರ ಅಧ್ಯಕ್ಷ ಅತ್ತಿಗುಂದ ಧರ್ಮಕುಮಾರ್, ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ವಿ. ಕದಿರೇಶ್, ಬಿ.ಕೆ ಶ್ರೀನಾಥ್, ಮಂಗೋಟೆ ರುದ್ರೇಶ್, ಜಿ. ಆನಂದ ಕುಮಾರ್, ಎಂ. ಮಂಜುನಾಥ್, ಬಿ.ಜೆ ರಾಮಲಿಂಗಯ್ಯ, ಎಸ್. ಚನ್ನೇಶ್, ಅಣ್ಣಪ್ಪ, ರಾಜಶೇಖರ ಉಪ್ಪಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ